ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ ಅವರು ಕರ್ನಾಟಕ ಜನತಾದಳ ಪಕ್ಷವನ್ನು ರಚಿಸಲಿದ್ದಾರೆ. ಇಲ್ಲವೇ, ತೆಲುಗು ಚಿತ್ರರಂಗ ನಟ ಚಿರಂಜೀವಿ ಅವರ ಪ್ರಜಾರಾಜ್ಯಂ ಸೇರಿಕೊಂಡು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಗಳಿವೆ. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಸಿದ್ದರಾಮಯ್ಯ ಈಗಾಗಲೇ ಭೇಟಿ ಮಾಡಿ ಈ ಕುರಿತು ಚರ್ಚಿಸಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿ ಹಬ್ಬಿತ್ತು. ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ ಯಡಿಯೂರಪ್ಪ, ಸುಳ್ಳು ಸುದ್ದಿಯನ್ನು ಹಬ್ಬಿಸಲಾಗಿದೆ. ಇಂತಹ ಯಾವ ಪ್ರಸ್ತಾವನೆ ನಮಗೆ ಬಂದಿಲ್ಲ ಎಂದರು.
ಸಿದ್ದರಾಮಯ್ಯ ಅವರಿಗೆ ತಮ್ಮ ರಾಜಕೀಯ ನಿಲುವುಗಳನ್ನು ತೆಗೆದುಕೊಳ್ಳಲು ಸ್ವಾತಂತ್ರ್ಯರು. ಆದು ಅವರ ವಿವೇಚನೆಗೆ ಬಿಟ್ಟ ವಿಚಾರ. ಈ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ ಎಂದು ಯಡಿಯೂರಪ್ಪ ಹೇಳಿದರು. ಮುಂದಿನ ಲೋಕಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡು ರಾಜ್ಯದ 28 ಸಂಸತ್ ಕ್ಷೇತ್ರಗಳಲ್ಲಿ 8 ಕ್ಷೇತ್ರಗಳನ್ನು ಸಿದ್ದು ಕೈಗೆ ಬಿಜೆಪಿ ನೀಡಲಿದೆ ಎನ್ನುವ ಸುದ್ದಿಯಾಗಿ ಕೇಳಿಬಂದಿತ್ತು.
ಮುಂದಿನ ಲೋಕಸಭೆ ಚುನಾವಣೆಗೆ ಬೇಕಿರುವ ಎಲ್ಲ ಸಿದ್ಧತೆಗಳಲ್ಲಿ ಬಿಜೆಪಿ ತೊಡಗಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಈ ಮೂಲಕ ಕಮ್ಮಿ ಎಂದರೂ 20 ಸೀಟುಗಳನ್ನು ಬಿಜೆಪಿ ಗೆಲ್ಲುವ ಗುರಿ ಹೊಂದಲಾಗಿದೆ. ಈ ಮೂಲಕ ಭಾರತದ ಪ್ರಧಾನಮಂತ್ರಿ ಸ್ಥಾನದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಕೂರಿಸಲು ಸರ್ವ ಪ್ರಯತ್ನ ನಡೆಸಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
ಸಿದ್ದರಾಮಯ್ಯ ಪ್ರಜಾರಾಜ್ಯಂಗೆ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ ಸಭೆಗೆ ಹಾಜರಾಗಲ್ಲ: ಸಿದ್ದರಾಮಯ್ಯ